ಕೆಲ ದಿನಗಳ ಹಿಂದಷ್ಟೇ ‘ಕೆ ಆರ್ ಜಿ ಸ್ಟುಡಿಯೋಸ್’ ಮತ್ತು ‘ಟಿವಿಎಫ್ ಮೋಷನ್ ಪಿಕ್ಚರ್ಸ್’ ಸಂಸ್ಥೆಗಳು ಜಂಟಿಯಾಗಿ ಹೊಸ ಚಿತ್ರ ನಿರ್ಮಾಣ ಮಾಡುವ ಘೋಷಣೆ ಹೊರಬಿದ್ದಿತ್ತು. ಇದೀಗ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಈ ಹೊಸ ಸಿನಿಮಾ ಸೆಟ್ಟೇರಿದೆ. ಈ ಹೊಸ ಸಿನಿಮಾಕ್ಕೆ ‘ಪೌಡರ್’ ಎಂದು ಹೆಸರಿಡಲಾಗಿದ್ದು, ವರಮಹಾಲಕ್ಷ್ಮೀ ಹಬ್ಬದಂದು ನಡೆದ ಈ ಸಿನಿಮಾದ ಮುಹೂರ್ತ ಸಮಾರಂಭದಲ್ಲಿ ನಟ ಕಿಚ್ಚ ಸುದೀಪ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ. ನಿರ್ಮಾಪಕ ಕಾರ್ತಿಕ್ ಗೌಡ ತಂದೆ ರಾಮಕೃಷ್ಣೇಗೌಡ ಕ್ಯಾಮೆರಾ ಸ್ವಿಚ್ ಆನ್ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಧನಂಜಯ್, ಸಂತೋಷ್ ಆನಂದರಾಮ್, ರೋಹಿತ್ ಪದಕಿ, ಧೀರೇನ್ ರಾಮಕುಮಾರ್, ನವೀನ್ ಶಂಕರ್, ಕೆ.ಮಂಜು, ಭೂಮಿ ಶೆಟ್ಟಿ, ನಾಗಭೂಷಣ್, ಟಿವಿಎಫ್ ಸಂಸ್ಥಾಪಕರಾದ ಅರುಣಭ್ ಕುಮಾರ್, ವಿಜಯ್ ಕೋಶಿ, ಚೈತನ್ಯ ಕುಂಬಕೋಣಂ ಮುಂತಾದವರು ಹಾಜರಿದ್ದರು.
‘ಪೌಡರ್’ ಒಂದು ಹಾಸ್ಯಮಯ ಚಿತ್ರವಾಗಿದ್ದು, ಒಂದು ಸಣ್ಣ ಊರಿನ ಯುವಕರಿಗೆ ದೊಡ್ಡ ಪ್ರಮಾಣದ ಕೊಕೇನ್ ಸಿಗುತ್ತದೆ. ಒಂದು ಕಡೆ ಆ ಕೊಕೇನ್ ಗಾಗಿ ಹುಡುಕಾಟದಲ್ಲಿರುವ ದುಷ್ಟರ ಗುಂಪು. ಇನ್ನೊಂದು ಕಡೆ ಆ ಕೊಕೇನ್ ಮಾರಿ ದಿಢೀರ್ ಶ್ರೀಮಂತರಾಗಬೇಕೆಂಬ ಯುವಕರ ಗುಂಪು. ಮತ್ತೊಂದು ಕಡೆ ತಮ್ಮ ಅಧಿಪತ್ಯ ಸ್ಥಾಪಿಸುವುದಕ್ಕೆ ಪ್ರಯತ್ನಿಸುತ್ತಿರುವ ಒಬ್ಬ ಮಾಸ್ಟರ್ ಮೈಂಡ್. ಈ ಹಾವು-ಏಣಿ ಆಟದಲ್ಲಿ ಗೆಲ್ಲುವವರು ಯಾರು? ಎಂದು ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಲಾಗುತ್ತಿದೆ.
ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ಈ ಬಹುತಾರಾಗಣದ ಚಿತ್ರದಲ್ಲಿ ದಿಗಂತ್, ಧನ್ಯ ರಾಮಕುಮಾರ್, ಶರ್ಮಿಳಾ ಮಾಂಡ್ರೆ, ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ಅಚ್ಯುತ್ ಕುಮಾರ್, ರವಿಶಂಕರ್ ಗೌಡ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ. ದೀಪಕ್ ವೆಂಕಟೇಶನ್ ಕಥೆ-ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಶಾಂತಿ ಸಾಗರ್ ಅವರ ಛಾಯಾಗ್ರಹಣವಿದೆ. ಬಹು ತಾರಾಗಣವಿರುವ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ನಲ್ಲಿ ಆರಂಭವಾಗಲಿದೆ. 2024ರ ಏಪ್ರಿಲ್ 5 ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.