‘ಸಾಯಿ ರಮೇಶ್ ಪ್ರೊಡಕ್ಷನ್’ ಲಾಂಛನದಲ್ಲಿ ಕೆ. ರಮೇಶ್ ಹಾಗೂ ಬಿ. ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ ‘ಭಗೀರಥ’ ಚಿತ್ರಕ್ಕೆ ಮೈಸೂರು, ಮಡಿಕೇರಿ ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.

ಇಲ್ಲಿಯವರೆಗೆ ‘ಭಗೀರಥ’ ಸಿನಿಮಾದ ಎರಡು ಹಾಡುಗಳ, ನಾಲ್ಕು ಸಾಹಸ ಸನ್ನಿವೇಶಗಳ ಹಾಗೂ ಮಾತಿನ ಭಾಗದ ಚಿತ್ರೀಕರಣ ನಡೆದಿದೆ. ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನದಲ್ಲಿ ನಾಲ್ಕೂ ಸಾಹಸ ಸನ್ನಿವೇಶಗಳು ಮೂಡಿಬಂದಿದೆ.
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ತಾರಾಬಳಗದಲ್ಲಿ ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಬಾಲ ರಾಜವಾಡಿ, ನಯನ, ಸುರಭಿ ರವಿ ಮುಂತಾದವರಿದ್ದಾರೆ. ಪ್ರದೀಪ್ ವರ್ಮ ಸಂಗೀತ ನೀಡಿರುವ ಈ ಚಿತ್ರಕ್ಕೆ ಸೂರಿ ಚಿತ್ತೂರು ಅವರ ಛಾಯಾಗ್ರಹಣವಿದೆ. ರವಿಚಂದ್ರನ್ ಸಂಕಲನ , ಮೋಹನ್ ರಾಸು ಸಹ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ “ಭಗೀರಥ” ಚಿತ್ರಕ್ಕಿದೆ.





