-ಬೆಂಗಳೂರಿನ ಮೊಟ್ಟ ಮೊದಲ ಟ್ರಾಫಿಕ್ ಸಿಗ್ನಲ್ ಸೃಷ್ಟಿಸಿದ್ದವರು!
-ಮಾಜಿ ಪೊಲೀಸ್ ಮಹಾ ನಿರ್ದೇಶಕ ಇನ್ನಿಲ್ಲ!
ಕರ್ನಾಟಕ ಕಂಡ ದಕ್ಷ ಪೊಲೀಸ್ ಅಧಿಕಾರಿ, ಶಿಸ್ತಿನ ಸಿಪಾಯಿ, ಪ್ರಯೋಗಶೀಲ ಮತ್ತು ಪೊಲೀಸ್ ಇಲಾಖೆಯಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದ ನಿಷ್ಠಾವಂತ ಮತ್ತು ಬೆಂಗಳೂರಿನ ಟ್ರಾಫಿಕ್ ಸಿಗ್ನಲ್ ಹರಿಕಾರ ಬಿ.ಎನ್ ಗರುಡಾಚಾರ್ ಮಾ.೨೮ರ ಶುಕ್ರ ವಾರ ಮುಂಜಾನೆ ೩ ಗಂಟೆಗೆ ವಿಧಿವಶರಾಗಿದ್ದಾರೆ. ಅವರಿಗೆ ೯೬ ವರ್ಷ ವಯಸ್ಸಾಗಿತ್ತು. ಉದ್ಯಮಿ ಮತ್ತು ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಸೇರಿದಂತೆ ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ಧಾರೆ. ಗರುಡಾಚಾರ್ ಅವರು ಪೊಲೀಸ್ ಇಲಾಖೆ ಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ದಕ್ಷತೆ ಮತ್ತು ಪ್ರಾಮಾಣಿಕತೆಯ ರೂಪವಾಗಿದ್ದರು. ಮಾ.೨೯ರ ಶನಿವಾರ ಸಂಜೆ ೪ ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸಕಲ ಗೌರವಗಳೊಂದಿಗೆ ಗರುಡಾಚಾರರ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ನೆರವೇರಿತು. ಅವರ ಕುಟುಂಬದವರು, ಬಂಧು-ಮಿತ್ರರು, ಹಿತೈಷಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, ರಾಜಕೀಯ ನಾಯಕರು, ವಿವಿಧ ಕ್ಷೇತ್ರಗಳ ಗಣ್ಯರು ಅವರ ಅಂತಿಮ ದರ್ಶನ ಪಡೆದು ವಿದಾಯ ವಂದನೆ ಸಲ್ಲಿಸಿದರು.

ಬಾಲ್ಯದಲ್ಲೇ ಕಡುಕಷ್ಟ ಬಯಲುಸೀಮೆಯ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಬರದ ಬೆಂಗಾಡು. ಈ ಹಳ್ಳಿಯ ಕೃಷಿ ಕುಟುಂಬದಲ್ಲಿ ೧೯೨೯ರಲ್ಲಿ ಹುಟ್ಟಿದ ಬಿ.ಎನ್. ಗರುಡಾಚಾರ್, ಹುಟ್ಟುತ್ತಲೇ ಕಷ್ಟವನ್ನು ಬೆನ್ನಿಗೆ ಕಟ್ಟಿಕೊಂಡು ಬಂದವರು. ಎಮ್ಮೆ, ದನ ಕಾಯುವ ಕೆಲಸ ಮಾಡಿ, ಸಗಣಿ ಬಾಚಿ ಬೇಸಾಯದ ಬಾಳುವೆ ಕಲಿತವರು. ತಂದೆಯ ಅಕಾಲಿಕ ಮರಣದ ನಂತರ ಕಡು ಕಷ್ಟಕ್ಕೆ ಸಿಲುಕಿದ ಕುಟುಂಬಕ್ಕೆ ಅಮ್ಮ ಆಸರೆ ಯಾದರು. ಬಂಧುಗಳ, ಹಿತೈಷಿಗಳ ನೆರವಿನಲ್ಲಿ ಬೆಳೆದು, ಹಳ್ಳಿಯ ಕೂಲಿ ಮಠದಲ್ಲಿ ವಿದ್ಯಾಭ್ಯಾಸ ಆರಂಭಿಸಿದ ಬಾಲಕ ಗರುಡಾಚಾರ್, ಗೊರೂರು, ಹಾಸನ, ಮೈಸೂರುಗಳಲ್ಲಿ ಅಲೆದಾಡಿ, ಅವರಿವರ ಮನೆಯಲ್ಲಿ ಆಶ್ರಯ ಪಡೆದು, ವಾರಾನ್ನ ಉಂಡು ಎಂ.ಎ. ಸ್ನಾತಕೋತ್ತರ ಪದವಿ ಪಡೆದರು. ಮುಂದುವರಿದು, ೧೯೫೩ರಲ್ಲಿ ಐಪಿಎಸ್ ಪಾಸ್ ಮಾಡಿ ಮೊದಲಿಗರೆನಿಸಿಕೊಂಡರು. ಓದಿನ ನಂತರ ಸರ್ವೇಯರ್, ಅಬಕಾರಿ ಇನ್ಸ್ಪೆಕ್ಟರ್ ಕೆಲಸಕ್ಕೆ ಸೇರಿದರು. ಅಲ್ಲಿಂದ ನೇರವಾಗಿ ಐಪಿಎಸ್ ಮಾಡಿ, ತಿರುವನ್ವೇಲಿಯಲ್ಲಿ ಅಸಿಸ್ಟೆಂಟ್ ಪೊಲೀಸ್ ಕಮಿಷನರ್ ಹುದ್ದೆ ಅಲಂಕರಿಸಿದ ಗುರುಡಾಚಾರ್ಗೆ, ಬಿಂಡಿಗನವಿಲೆಯ ಬಡತನ, ಹಸಿವು, ಅವಮಾನ, ಹಿಂಜರಿಕೆ, ಮುಗ್ಧತೆ, ಪ್ರಾಮಾಣಿಕತೆ ಎಲ್ಲವೂ ಬೆನ್ನಿಗಿದ್ದವು. ಅವುಗಳ ಅಗಾಧ ಅನುಭವ ಅವರನ್ನು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರುವಲ್ಲಿ ಪ್ರಶಸ್ತಿ, ಪುರಸ್ಕಾರ, ಪ್ರಶಂಸೆ ಪಡೆಯುವಲ್ಲಿ ಉದ್ದಕ್ಕೂ ಸಹಕರಿಸಿದ್ದವು.
ಪೊಲೀಸ್ ವೃತ್ತಿಯಲ್ಲಿ ಶಿಸ್ತು ಮತ್ತು ದಕ್ಷತೆ ಯಿಂದ ಕಾರ್ಯ ನಿರ್ವಹಿಸಿದ ಗರುಡಾಚಾರ್ ಬಹಳ ಬೇಗ ಉನ್ನತ ಸ್ಥಾನಗಳನ್ನು ಅಲಂಕರಿಸಿ, ಅಧಿಕಾರಸ್ಥ ರಾಜಕಾರಣಿಗಳ ಕಣ್ಣಿಗೆ ಬಿದ್ದಿದ್ದರು. ಕೊಪ್ಪಳ, ಹುಮ್ನಾಬಾದ್, ತುಮಕೂರು, ಬಳ್ಳಾರಿ, ಬೆಂಗಳೂರು ಜಿಲ್ಲಾ ಎಸ್ಪಿಯಾಗಿ ಉತ್ತಮ ಸೇವೆ ಸಲ್ಲಿಸಿ ಹೆಸರಾಗಿದ್ದರು. ಬಿ.ಎನ್ ಗರುಡಾಚಾರ್ ಅವರು ೧೯೬೩ರಲ್ಲಿ ಬೆಂಗಳೂರು ನಗರದ ಸಂಚಾರ ಪೊಲೀಸ್ ಉಪ ಆಯುಕ್ತರಾಗಿದ್ದರು, ಆ ಸಮಯದಲ್ಲಿ ಬೆಂಗಳೂರಿನ ಕಾರ್ಪೊರೇಷನ್ ವೃತ್ತದಲ್ಲಿ ಬೆಂಗಳೂರು ನಗರದ ಮೊದಲ ಟ್ರಾಫಿಕ್ ಸಿಗ್ನಲ್ ಪ್ರಾರಂಭಿಸಿದ್ದರು. ಈ ಐತಿಹಾಸಿಕ ಘಟನೆಯ ಸವಿನೆನಪಿಗಾಗಿ, ಈ ಘಟನೆ ಯನ್ನು ಹೆಸರಿಸುವ ಕಲ್ಲನ್ನು ೨೦೨೧ರ ಮಾರ್ಚ್ನಲ್ಲಿ ಖುದ್ದು ಗರುಡಾಚಾರ್ ಅವರೇ ಅಂದಿನ ಬೆಂಗ ಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂತ್, ಬೆಂಗಳೂರು ನಗರದ ಸಂಚಾರ ಜಂಟಿ ಪೊಲೀಸ್ ಆಯುಕ್ತ ಬಿ.ಆರ್.ರವಿಕಾಂತೇಗೌಡ ಜತೆಗೂಡಿ ಉದ್ಘಾಟಿಸಿದ್ದರು.

ಅಂದು ಗರುಡಾ ಚಾರ್ ಅವರನ್ನೂ ಪೊಲೀಸ್ ಇಲಾಖೆಯಿಂದ ಸನ್ಮಾನಿಸಿ ಗೌರವಿಸಲಾಗಿತ್ತು. ೧೯೭೨ರಲ್ಲಿ ಡಿಐಜಿಯಾಗಿದ್ದಾಗ, ೧೯೭೫ರಲ್ಲಿ ಇಂಟಲಿಜೆನ್ಸ್ ಡಿಐಜಿ ಆದಾಗ, ೧೯೭೬ರಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡಾಗ ಮುಖ್ಯಮಂತ್ರಿ ದೇವರಾಜ ಅರಸರ ಆಡಳಿತ ವಿತ್ತು. ಅನಂತರ ಅಡಿಷನಲ್ ಐಜಿ, ಡಿಜಿ ಮತ್ತು ಐಜಿಪಿ ಯಾಗಿ ನಿವೃತ್ತರಾದರು. ಖಡಕ್ ಅಧಿಕಾರಿ ಎಂದೇ ಹೆಸರು ಪಡೆದ ಗರುಡಾಚಾರ್ ವೀರೇಂದ್ರ ಪಾಟೀಲ್, ದೇವ ರಾಜ ಅರಸು, ಗುಂಡೂ ರಾವ್, ಹೆಗಡೆಯವರೊಂದಿಗೆ ನಿಕಟ ಸಂಪರ್ಕವನ್ನಿಟು ಕೊಂಡಿದ್ದರು. ೧೯೭೫ರ ತುರ್ತು ಪರಿಸ್ಥಿತಿಯಲ್ಲಿ ಇಂಟಲಿಜೆನ್ಸ್ ಐಜಿಯಾಗಿ, ರಾಷ್ಟ್ರಮಟ್ಟದ ರಾಜಕೀಯ ನಾಯಕರನ್ನು ಬಂಧಿಸಿ, ಜೈಲಿಗೆ ಹಾಕುವ ಮೂಲಕ ರಾಷ್ಟ್ರವ್ಯಾಪಿ ಸುದ್ದಿಯಾಗಿದ್ದರು. ದೇವರಾಜ ಅರಸರನ್ನು ೧೯೬೨ರಿಂದ ಬಲ್ಲವರಾಗಿದ್ದು, ಅವರು ಮುಖ್ಯಮಂತ್ರಿಯಾಗಿದ್ದಾಗ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡು, ನಾಲ್ಕು ವರ್ಷಗಳ ಕಾಲ ಕಮಿಷನರ್ ಹುದ್ದೆಯ ಲ್ಲಿದ್ದು, ಪ್ರತಿದಿನ ಅರಸು ಅವರೊಂದಿಗೆ ಮುಖಾ ಮುಖಿಯಾಗುತ್ತಿದ್ದರು.
೬೦ರ ದಶಕದಲ್ಲಿ ಹೈದರಾಬಾದ್ನಲ್ಲಿ ಕಲಿತ ಉರ್ದುವನ್ನು ಇಂದಿಗೂ ಬಿಡದೆ, ಪ್ರತಿದಿನ ಡೈಲಿ ಸಾಲಾರ್ ಉರ್ದು ಪತ್ರಿಕೆಯನ್ನು ತಪ್ಪದೆ ಓದುವ ಹವ್ಯಾಸ ಇಟ್ಕೊಂಡಿದ್ದರು. ೯೦ರ ಹರೆಯದಲ್ಲೂ ಗುರುಡಾಚಾರ್, ಮಗನ ಪ್ರತಿಷ್ಠಿತ ಗರುಡಾ ಮಾಲ್ನಲ್ಲಿ, ಏಳನೆ ಮಹಡಿಯಲ್ಲಿ ಯುವಕರನ್ನೂ ನಾಚಿಸುವ ಲವಲವಿಕೆಯಿಂದ ಕಾರ್ಯ ನಿರ್ವಹಿಸುತ್ತಿದ್ದರು. ಅವರ ನೆನೆಪಿಗಾಗಿ ಬೆಂಗಳೂರು ಮತ್ತು ಮೈಸೂರಿನಲ್ಲಿ ಗರುಡಾ ಮಹಲ್ ಭವ್ಯವಾಗಿ ನಿರ್ಮಾಣಗೊಂಡು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಖಡಕ್ ಪೊಲೀಸ್ ಅಧಿಕಾರಿ ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬಿಂಡಿಗೇನವಿಲೆ ಗ್ರಾಮ ಮೂಲದವರಾದ ಬಿ.ಎನ್. ಗರುಡಾಚಾರ್ ತಮ್ಮ ಶಿಕ್ಷಣವನ್ನು ಪೂರೈಸಿ, ಕರ್ನಾ ಟಕ ರಾಜ್ಯದ ಪೊಲೀಸ್ ಇಲಾಖೆಯ ಉನ್ನತ ಶ್ರೇಣಿಯ ಅಧಿಕಾರಿಯಾಗಿ ನೇಮಕಗೊಂಡು, ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠ ಅಧಿಕಾರಿ ಯಾಗಿ ಕಾರ್ಯನಿರ್ವಹಿಸಿ, ನಂತರ ಬೆಂಗಳೂರು ಜಿಲ್ಲೆಯ ಎಸ್.ಪಿ ಹಾಗೂ ಬೆಂಗಳೂರು ಮಹಾ ನಗರದ ಡಿ.ಸಿ.ಪಿ ಯಾಗಿ (೮ ವರ್ಷಗಳು) ಮತ್ತು ಪೊಲೀಸ್ ಕಮಿಷನರ್ ಆಗಿ (೪ ವರ್ಷ ೨ ತಿಂಗಳು), ಪೊಲೀಸ್ ಡಿಜಿ/ಐಜಿಪಿಯಾಗಿ (೩ ವರ್ಷ ೮ ತಿಂಗಳು) ಸೇವೆ ಸಲ್ಲಿಸಿದರು.
ಇವರ ಕಾರ್ಯದಕ್ಷತೆಯನ್ನು ಮೆಚ್ಚಿ ಕರ್ನಾಟಕ ಸರ್ಕಾರವು ಕೆ.ಎ.ಟಿಯ ಸದಸ್ಯರಾಗಿ ಓರ್ವ ಐಪಿಎಸ್ ಅಧಿಕಾರಿಯನ್ನು ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ನೇಮಕ ಮಾಡಿತ್ತು. ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಇವರ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ವಿವಿಧ ಪುರಸ್ಕಾರಗಳನ್ನು ನೀಡಿ ಗೌರವಿಸಿದೆ. ಸಹಸ್ರಾರು ಮಂದಿ ಶ್ರದ್ಧಾಂಜಲಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೊಸ ಛಾಪು ಮೂಡಿಸಿದ್ದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ರಾದ ಬಿ.ಎನ್. ಗರುಡಾಚಾರ್ ಅವರ ನಿಧನದಿಂದ ಹಿಂದಿನ ತಲೆಮಾರಿನ ದಕ್ಷ ಪೊಲೀಸ್ ಅಧಿ ಕಾರಿಯ ಪ್ರಬಲ ಕೊಂಡಿಯೊಂದು ಕಳಚಿ ದಂತಾಗಿದೆ.. ಬಸವನಗುಡಿಯ ಕೃಷ್ಣ ರಸ್ತೆಯಲ್ಲಿರುವ ಪೋಸ್ಟ್ ಆಫೀಸ್ ಹಿಂಭಾಗದ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿತ್ತು. ಸಹಸ್ರಾರು ಮಂದಿ ಅಗಲಿದ ದಕ್ಷ ಅಧಿಕಾರಿಗೆ ಅಂತಿಮ ನಮನ ಸಲ್ಲಿಸಿದೆಉ. ದಕ್ಷ ಹಾಗೂ ಖಡಕ್ ಪೊಲೀಸ್ ಅಧಿಕಾರಿ ಯೆಂದೇ ಹೆಸರು ಮಾಡಿರುವ ಬಿ.ಎನ್.ಗರುಡಾ ಚಾರ್ ಅವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಗ್ರಾಮದವರು.
ಇವರು ೧೯೭೬ ರಿಂದ ೧೯೮೦ರ ವರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿ ಹಲವು ಪರಿಣಾಮಕಾರಿ ಯೋಜನೆ ಜಾರಿಗೆ ತಂದ ಹೆಗ್ಗಳಿಕೆ ಇವರದ್ದು. ಅಪರಾಧ ತಡೆಗಟ್ಟಿ ಬೆಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿ ಒಳ್ಳೆಯ ಹೆಸರು ಗಳಿಸಿದ್ದರು. ಬೆಂಗಳೂರಿನ ಮೊದಲ ಕಮಿಷನರ್ ಸಿ.ಚಾಂಡಿ ಅವರ ಕಾಲದಲ್ಲಿ ಬೆಂಗಳೂರು ಸಂಚಾರ ವಿಭಾಗದ ಡಿಸಿಪಿ ಆಗಿದ್ದ ಬಿ.ಎನ್ ಗರುಡಾಚಾರ್ ಅವರು, ಎನ್.ಆರ್. ಜಂಕ್ಷನ್ (ಎಲ್ಐಸಿ ಕಚೇರಿ ಬಳಿ)ನಲ್ಲಿ ಸಂಚಾರ ದಟ್ಟಣೆ ಹೆಚ್ಚಿದ್ದ ಕಾರಣಕ್ಕೆ ಸಿಗ್ನಲ್ ಅಳವಡಿಸಿದ್ದರು. ಇದು ಬೆಂಗಳೂರಿನ ಮೊದಲ ಟ್ರಾಫಿಕ್ ಸಿಗ್ನಲ್ ಆಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದ ಅವರು, ನಂತರ ಬೆಂಗಳೂರು ನಗರ ಡಿಸಿಪಿಯಾಗಿ ಸೇವೆ ಸಲ್ಲಿಸಿದ್ದು, ರಾಜ್ಯದ ಡಿಜಿ ಮತ್ತು ಐಜಿಪಿಯಾಗಿ ಉತ್ತಮ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.
ಇವರ ಪುತ್ರ ಉದಯ್ ಗರುಡಾಚಾರ್ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು. ಬಿ.ಎನ್.ಗರುಡಾಚಾರ್ ಅವರು ಬೆಂಗಳೂರು ನಗರದ ಕಮೀಷನರ್, ಪೊಲೀಸ್ ಮಹಾನಿರ್ದೇಶಕ ಸೇರಿದಂತೆ ಹಲವು ಮಹತ್ವದ ಹುದ್ದೆಗಳನ್ನು ಅಲಂಕರಿಸಿದ್ದರು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆಯಾದಾಗ ಗರುಡಾಚಾರ್ ಅವರು ಟ್ರಾಫಿಕ್ ವಿಭಾಗದ ಡಿಸಿಪಿ ಆಗಿದ್ದರು. ೧೯೬೩ರಲ್ಲಿ ಬೆಂಗಳೂರಿನ ಎನ್.ಆರ್.ಜಂಕ್ಷನ್ನಲ್ಲಿರುವ ಮೊದಲ ಟ್ರಾಫಿಕ್ ಸಿಗ್ನಲ್ ಇವರ ಮುಂದಾಳತ್ವದಲ್ಲೇ ಸ್ಥಾಪನೆಯಾಗಿತ್ತು. ಗಣ್ಯಾತಿಗಣ್ಯರ ಸಂತಾಪ ಗರುಡಾಚಾರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕರ್ನಾಟಕ ಕಂಡಂತಹ ದಕ್ಷ ಹಾಗೂ ಪ್ರಯೋಗ ಶೀಲ ಪೊಲೀಸ್ ಅಧಿಕಾರಿ ಬಿ.ಎನ್.ಗರುಡಾಚಾರ್ ಅವರು ವಿಧಿವಶರಾದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ.

ಬೆಂಗಳೂರಿಗೆ ಟ್ರಾಫಿಕ್ ಸಿಗ್ನಲ್ ಪರಿಚಯಿಸಿದ್ದ ಅವರು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿ ಸಾಕಷ್ಟು ಪರಿವರ್ತನೆಗೆ ಕಾರಣರಾಗಿದ್ದರು. ಅವರ ಕುಟುಂಬದ ದುಃಖದಲ್ಲಿ ನಾನೂ ಭಾಗಿ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದಿದ್ದಾರೆ. ಹಿರಿಯರು, ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾ ಚಾರ್ ಅವರ ಅಗಲಿಕೆಯ ಸುದ್ದಿ ತಿಳಿದು ಅತೀವ ದುಖಃವಾಯಿತು. ಮೃತರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇನೆ. ಭಗವಂತನು ಅವರ ಕುಟುಂಬ ವರ್ಗಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಕೂಡ ಪ್ರಾರ್ಥಿಸಿದ್ದಾರೆ. ಕರ್ನಾಟಕ ಕಂಡಂತಹ ಒಬ್ಬ ದಕ್ಷ ಐಪಿಎಸ್ ಅಧಿಕಾರಿ ಮತ್ತು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉದಯ್ ಬಿ ಗರುಡಾಚಾರ್ ಅವರ ತಂದೆ ಗರುಡಾಚಾರ್ ರವರು ನಿಧನರಾಗಿದ್ದಾರೆ ಎನ್ನುವುದು ಅತ್ಯಂತ ನೋವಿನ ಸಂಗತಿ. ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ಉನ್ನತ ಶ್ರೇಣಿಯ ಅಧಿಕಾರಿಯಾಗಿ ನೇಮಕಗೊಂಡು, ಬೆಂಗಳೂರು ಮಹಾನಗರದ ಪೊಲೀಸ್ ಕಮಿಷನರ್ , ಡಿಜಿ, ಐಜಿಪಿಯಾಗಿ, ಕೆಎಟಿ ಸದಸ್ಯರಾಗಿ ದಕ್ಷತೆಯಿಂದ ಸೇವೆ ಸಲ್ಲಿಸಿದ್ದರು ಎಂದು ಬಿಜೆಪಿ ನಾಯಕ ಆರ್.ಅಶೋಕ್ ಸಂತಾಪ ಸೂಚಿಸಿದ್ದಾರೆ. ನಿವೃತ್ತ ಪೊಲೀಸ್ ಮಹಾನಿರ್ದೇಶಕ ಮತ್ತು ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಬಿ ಗರುಡಾಚಾರ್ ಅವರ ತಂದೆ ಬಿ.ಎನ್.ಗರುಡಾಚಾರ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮೃತರ ಕುಟುಂಬಕ್ಕೆ, ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಅಗಲುವಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ. ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. ‘ಪೊಲೀಸ್ ಇಲಾಖೆಯಲ್ಲಿ ಹೊಸ ರೀತಿಯ ಸುಧಾರಣೆಗಳನ್ನು ತಂದಂತಹ ಪ್ರಯೋಗ ಶೀಲ ಅಧಿಕಾರಿಯಾಗಿ ಗರುಡಾಚಾರ್ ಅವರು ಗುರುತಿಸಿಕೊಂಡಿದ್ದರು. ಬೆಂಗಳೂರು ನಗರ ಬೆಳೆಯುತ್ತದೆ ಎನ್ನುವ ಅರಿವಿನಿಂದ ೧೯೬೩ ರಲ್ಲಿಯೇ ಬೆಂಗಳೂರಿನಲ್ಲಿ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಪರಿಚಯಿಸಿದ್ದ ವ್ಯಕ್ತಿ. ತಮ್ಮ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ಹೆಸರುವಾಸಿಯಾಗಿದ್ದ ಗರುಡಾಚಾರ್ ಅವರು ಇಂದಿನ ತಲೆಮಾರಿನ ಪೊಲೀಸ್ ಇಲಾಖೆಯವರಿಗೆ ಮಾದರಿ ಎನ್ನಬಹುದು.
ಯಾವುದೇ ಲಾಬಿ, ಒತ್ತಡಗಳಿಗೆ ಮಣಿಯದೆ ಸಮಾಜಘಾತು ಕರನ್ನು ಕಟ್ಟಿ ಹಾಕಿದವರು. ಕರ್ನಾಟಕ ಪೊಲೀಸ್ ವ್ಯವಸ್ಥೆಗೆ ಘನತೆ ತದ್ದುಕೊಟ್ಟವರು.. ೧೯೫೩ರಲ್ಲಿಯೇ ಐಪಿಎಸ್ ಪಾಸು ಮಾಡಿ ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಈ ಇಲಾಖೆಗೆ ಹಾಗೂ ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇವರ ಕಾರ್ಯದಕ್ಷತೆಯನ್ನು ಅನೇಕ ಗಣ್ಯಾತಿಗಣ್ಯರಯ ಹತ್ತಿರದಿಂದ ನೋಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಹಿರಿಯರಾದ ಗರುಡಾಚಾರ್ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಆ ಭಗವಂತ ಕುಟುಂಬ ಸದಸ್ಯರಿಗೆ ನೀಡಲೆಂಬುದು ಹಾರೈಕೆ.